ಪ್ರಹರಿ…. 

Share Button
ಅರಿವಿಲ್ಲದವನೆಡೆಗೆ ಎಸೆಯದಿರಿ ಹೂವುಗಳ
ಕಲ್ಲಾಗಿ ನಾನಿಹೆನು ಮರೆತಂತೆ ನೆನಹುಗಳ
ಕಾರ್ಗಿಲ್ ನ ಆಘಾತ ಮರೆಸಿತ್ತು ಅರಿವುಗಳ
ಕರಟಿಸಿ ಕದಿರೊಡೆದ ಭಾವನೆಯ ಚಿಗುರುಗಳ
 .
ಪ್ರಹರಿಯಾದ ನನ್ನಾಸೆ ಅರಳಿತ್ತು ಆಗೊಮ್ಮೆ
ಟಿಸಿಲೊಡೆದ ಭಾವನೆಯ ಚಿಗುರುಗಳ ಕಡೆಗೊಮ್ಮೆ
ಹಸಿರುನೆಲ ತಿಳಿನೀಲದಂಬರದ ರಕ್ಷೆಯಲಿ
ತನ್ನವರ ಸ್ಥಿರನೆಲೆಯ ಸುಖನಗೆಯ ಕಕ್ಷೆಯಲಿ
                                                     .
 .
ಸುಡುಸುಡುವ ಬಿಸಿಲಿರಲಿ ಮೈಕೊರೆವ ಚಳಿಯಿರಲಿ
ಬಸಿದ ಕಣ್ಣೀರಿರಲಿ ಹರಿದ ಕೆನ್ನೀರಿರಲಿ
ನೊವಿರಲಿ ನಲಿವಿರಲಿ ತನ್ನವರ ನೆನಪಿನಲಿ
ಕಾವನೀ ಪರಿ ಪ್ರಹರಿ ಬತ್ತದಾವೇಶದಲಿ
.
kaargil 3
.
ಕೊಚ್ಚಿ ಬಿಸುಟರೂ ಸಖರ, ಮತ್ತೆ ತರಿದರೂ ಹಲರ
ಒರಸಿ ನಡೆವರು ಮುಂದೆ ಸೆಲೆಯೊಡೆವ ಕಣ್ಣೀರ
ತಮ್ಮೊಡಲ ಪ್ರಿಯಸಖರ ,ಏಕಾಂಗೀ ಕಳೆವರವ
ಬಿಟ್ಟು ಕೊಡುವರು ಜೀವ, ಕಾಯೆ ತಾಯಿಯ ನೆಲವ
.
ಯಾರದೋ ಸ್ವಾರ್ಥಕ್ಕೆ ಕಾಟ ಸೆಣಸಾಟಕ್ಕೆ
ಸೆಣೆಸಿ ನಿಲುವರು ತಮ್ಮ ಪ್ರಾಣ ಬಲಿದಾನಕ್ಕೆ
ಉಳಿಯೆ ಕಾಯ್ವರು ಮತ್ತೆ ಮಲೆ ಹತ್ತಿ ಗಡಿ ಸುತ್ತೆ
ಅಳಿದುಳಿವ ಕೆಚ್ಚೊಲವು ಇದುವೆ ಪ್ರಹರಿಯ ನಿತ್ತೆ
.
ಮುಗಿಯದೀ ಸೆಣಸಾಟ ಈ ಹೂಟ ಕೆಣಕಾಟ
ಅಳಿದವರ ಮನೆಮನೆಯ ಕಣ್ಣೊರಸೋ ಹೆಣಗಾಟ
ಮತ್ತೆ ದುರ್ಲಭ ಅವರ ಹೆತ್ತೊಡಲ ಸರಸಾಟ
ಪ್ರಹರಿಯಾ ಪ್ರಿಯಜನರ ಹುಸಿನಗೆಯ ಸವಿಯೂಟ
 .
ನನಗೀಗ ಬಲುದೂರ ಕರಗುವಾ ಬೆಳ್ಸೆರಗು
ಮಿಡುಕುವಾ ಹಸಿರೆಲೆಯ ಪ್ರಕೃತಿಯ ನಲ್ಸೆರಗು
ಅರಿವಿಲ್ಲದವನೆಡೆಗೆ ಎಸೆಯದಿರಿ ಪುಷ್ಪಗಳ
ಕಲ್ಲಾಗಿ ನಾನಿಹೆನು ಮರೆತಂತೆ ನೆನಹುಗಳ
 .
kaargil 1
  
.
– ಬೆಳ್ಳಾಲ ಗೋಪಿನಾಥ ರಾವ್ \

1 Response

  1. Niharika says:

    ನಿಜಕ್ಕೂ ನಮ್ಮ ಯೋಧರು ಗ್ರೇಟ್ ..

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Follow

Get every new post on this blog delivered to your Inbox.

Join other followers: